ಕುಂದಾಪುರ: ಬಾವಿ ಕೆಲಸದ ವೇಳೆ ದುರಂತ – ವ್ಯಕ್ತಿಯೊಬ್ಬರು ಮುಳುಗಿ ಸಾವು

ಕುಂದಾಪುರ, ಮೇ 29, 2025: ಕುಂದಾಪುರ ತಾಲೂಕಿನ ಬಳ್ಕೂರು ಗ್ರಾಮದ ಸುಭಾಷ್ (50) ಎಂಬ ವ್ಯಕ್ತಿಯು ಬಾವಿ ಕೆಲಸದ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಗೋಪಾಡಿ ಗ್ರಾಮದ ಮೂಡುಗೋಪಾಡಿಯಲ್ಲಿ ನಡೆದಿದೆ. ದೂರುದಾರರಾದ ಅವರ ಪುತ್ರ ಅಭಿಷೇಕ್ (20) ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಸುಭಾಷ್ ಅವರು ತಮ್ಮ ಅಣ್ಣ ಸುರೇಂದ್ರ ಜೊತೆಗೆ ಕಳೆದ ಮೂರು ತಿಂಗಳಿಂದ ಗೋಪಾಡಿ ಗ್ರಾಮದ ಕರುಣಾಕರ ಎಂಬುವವರ ಜಾಗದಲ್ಲಿ ಬಾವಿ ತೋಡುವ ಕೆಲಸದಲ್ಲಿ ತೊಡಗಿದ್ದರು. ದಿನಾಂಕ 28/05/2025ರಂದು ಬೆಳಿಗ್ಗೆ ಎಂದಿನಂತೆ ಕೆಲಸಕ್ಕೆ ತೆರಳಿದ್ದ ಸುಭಾಷ್, ಮಧ್ಯಾಹ್ನ 1:45 ಗಂಟೆ ಸುಮಾರಿಗೆ ಬಾವಿಯ ರಿಂಗ್ ಬದಿಯಲ್ಲಿ ಜಲ್ಲಿ ಕಲ್ಲುಗಳನ್ನು ಹಾಕಲು ಅಳವಡಿಸಿದ್ದ ಪಿವಿಸಿ ಪೈಪ್ ಬಾವಿಯೊಳಗೆ ಬಿದ್ದಿತ್ತು. ಇದನ್ನು ತೆಗೆಯಲು ಬಾವಿಗೆ ಇಳಿದಿದ್ದ ವೇಳೆ, ಪೈಪ್ ಸಿಗದೇ, ಪುನಃ ಮೇಲೆ ಬರಲು ಹಗ್ಗದ ಸಹಾಯದಿಂದ ಹತ್ತುತ್ತಿರುವಾಗ ಆಕಸ್ಮಿಕವಾಗಿ ಹಗ್ಗವು ಕೈಯಿಂದ ಜಾರಿ ಬಾವಿಯ ನೀರಿಗೆ ಬಿದ್ದು ಮುಳುಗಿ ಮೃತಪಟ್ಟಿದ್ದಾರೆ.

ಈ ಘಟನೆಯ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಕ್ರಮಾಂಕ 30/2025ರಡಿ, ಕಲಂ 194 BNSS ರಂತೆ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ.

Comments

Leave a Reply

Your email address will not be published. Required fields are marked *