ಬೆಂಗಳೂರು ಕಾಲ್ತುಳಿತ: ಪೊಲೀಸ್ ಕಮಿಷನರ್ ಸೇರಿ ಹಲವು ಅಧಿಕಾರಿಗಳ ಅಮಾನತು

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ (ಜೂನ್ 4, 2025) ನಡೆದ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿ, 47ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ರಾಜ್ಯ ಸರ್ಕಾರವು ತಕ್ಷಣವೇ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ್, ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ವಿಕಾಸ್, ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಎಚ್.ಟಿ., ಒಬ್ಬ ಎಸಿಪಿ ಹಾಗೂ ಕಬ್ಬನ್ ಪಾರ್ಕ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಗಿರೀಶ್ ಎ.ಕೆ. ಅವರನ್ನು ಅಮಾನತುಗೊಳಿಸಿದೆ.

ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ, ಉಪ ಮುಖ್ಯಮಂತ್ರಿ, ಹಿರಿಯ ಸಚಿವರು, ಮುಖ್ಯಮಂತ್ರಿಯ ಕಾನೂನು ಸಲಹೆಗಾರ, ಅಡ್ವೊಕೇಟ್ ಜನರಲ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕರೊಂದಿಗೆ ಸುದೀರ್ಘವಾಗಿ ಸಮಾಲೋಚನೆ ನಡೆಸಿದ ಬಳಿಕ ತುರ್ತು ಪತ್ರಿಕಾಗೋಷ್ಠಿಯನ್ನುದ್ದೇಶಿ ಅವರು ಮಾತನಾಡಿದರು.

ಸತ್ತವರ ಹೆಸರುಗಳ ಪಟ್ಟಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಚಿವ ಸಂಪುಟ ಸಭೆಯ ನಂತರ ವಿಧಾನಸೌಧದ ಸಮ್ಮೇಳನ‌ ಸಭಾಂಗಣದಲ್ಲಿ ನಡೆಸಿದ ಸುದ್ದಿಗೋಷ್ಠಿಯ ಮುಖ್ಯಾಂಶಗಳು:

  • ಆರ್‌ಸಿಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆ ದು:ಖಕರವಾಗಿದ್ದು, ಮೃತಪಟ್ಟವರಿಗೆ ಮತ್ತೊಮ್ಮೆ ಸಂತಾಪ ಸೂಚಿಸುತ್ತಿದ್ದೇನೆ. ಇಂದು ಎಂದಿನಂತೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಕುರಿತು ಗಂಭೀರ ಚರ್ಚೆ ನಡೆಸಲಾಗಿದೆ. ನಿನ್ನೆ ನಡೆದ ಅಹಿತಕರ ಘಟನೆ ಬಗ್ಗೆ ಚರ್ಚಿಸಿ ಕೆಲವು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ.
  • ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರಾದ ಜಸ್ಟೀಸ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನು ರಚಿಸಿ, ತನಿಖೆ ನಡೆಸಲಾಗುತ್ತದೆ.
  • ಆರ್.ಸಿ.ಬಿ ಸಂಸ್ಥೆ ಹಾಗೂ ಕಾರ್ಯಕ್ರಮ ಆಯೋಜಕರಾದ ಡಿಎನ್‌ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಈ ಮೂರು ಸಂಸ್ಥೆಗಳ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಬಂಧಿಸಲು ಸೂಚನೆ ನೀಡಲಾಗಿದೆ. ಇವರ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ.
  • ಕಬ್ಬನ್ ಪಾರ್ಕ್ ಪೊಲೀಸ್ ಸ್ಟೇಷನ್ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿದಂತೆ ಆ ಭಾಗದ ಎಸಿಪಿ, ಸೆಂಟ್ರಲ್ ಡಿಸಿಪಿ, ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತರು ಮತ್ತು ಬೆಂಗಳೂರು ನಗರದ ಪೊಲೀಸ್ ಕಮೀಷನರ್ ರನ್ನು ತಕ್ಷಣದಿಂದ ಅಮಾನತ್ತುಗೊಳಿಸಲು ತೀರ್ಮಾನಿಸಲಾಗಿದೆ. ಈ ದುರಂತಕ್ಕೆ ಸಂಬಂಧಪಟ್ಟ ಚರ್ಚೆಯ ನಂತರ ತೆಗೆದುಕೊಂಡ ತೀರ್ಮಾನಗಳಾಗಿವೆ. ಉಪಮುಖ್ಯಮಂತ್ರಿಗಳು, ಗೃಹಸಚಿವರು, ಸಚಿವರಾದ ಎಚ್.ಕೆ.ಪಾಟೀಲ್, ಸುಧಾಕರ್, ಮಹಾದೇವಪ್ಪ ಸೇರಿದಂತೆ ಹಿರಿಯ ಅಧಿಕಾರಿಗಳು ಚರ್ಚೆಯಲ್ಲಿ ಭಾಗವಹಿಸಿದ್ದರು.
  • ಮೇಲ್ನೋಟಕ್ಕೆ ಈ ಅಧಿಕಾರಿಗಳ ಬೇಜವಾಬ್ದಾರಿತನ, ಅಲಕ್ಷ್ಯ ಕಂಡುಬರುತ್ತಿದ್ದು, ಇವರುಗಳನ್ನು ಅಮಾನತ್ತುಗೊಳಿಸಲು ತೀರ್ಮಾನಿಸಲಾಗಿದೆ.
  • ನಾನು ಶಾಸಕರು, ಸಚಿವ, ಡಿಸಿಎಂ ಹಾಗೂ ಮುಖ್ಯಮಂತ್ರಿಯಾದ ನಂತರ ಇಂತಹ ಘಟನೆ ನಡೆದಿರಲಿಲ್ಲ. ಈ ಘಟನೆ ನನ್ನನ್ನು ಘಾಸಿಗೊಳಿಸಿದೆ. ದುರಂತದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರುತ್ತಾ, ಕುಟುಂಬದವರ ಜೊತೆ ಸರ್ಕಾರವಿದೆ ಎನ್ನುವ ಭರವಸೆಯನ್ನು ಕೂಡ ನೀಡಬಯಸುತ್ತೇನೆ.

ನಿನ್ನೆ ಆದೇಶ ನೀಡಿದಂತೆ ಮ್ಯಾಜಿಸ್ಟ್ರೇಟ್ ತನಿಖೆ ಪ್ರಾರಂಭವಾಗಿದೆ. ಈ ಮಹಾದುರಂತದ ಬಗ್ಗೆ ಕೆಲವು ಮಾಹಿತಿಗಳು ದೊರೆತ ನಂತರ, ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಮೂರು ಸಂಸ್ಥೆಗಳ ವಿರುದ್ಧದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.

Comments

Leave a Reply

Your email address will not be published. Required fields are marked *