Blog

  • ಗಂಗೊಳ್ಳಿ: ಸಮುದ್ರಪಾಲಾಗಿ ಮೂವರು ನಾಪತ್ತೆ ಪ್ರಕರಣ; ಪತ್ತೆಗೆ ಅಗತ್ಯ ಕ್ರಮ ಕೈಗೊಳ್ಳಲು ಉಸ್ತುವಾರಿ ಸಚಿವೆ ಸೂಚನೆ

    ಗಂಗೊಳ್ಳಿ, ಜುಲೈ 15, 2025: ಇಂದು ನಾಡದೋಣಿ ಮಗುಚಿ ನೀರು ಪಾಲಾಗಿರುವ ಮೂವರು ಮೀನುಗಾರರ ಪತ್ತೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ಘಟನೆ ತಿಳಿದ ತಕ್ಷಣವೇ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದ ಸಚಿವೆ, ಮೀನುಗಾರರ ಪತ್ತೆಗೆ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು. ಮೂವರನ್ನು ಸುರಕ್ಷಿತವಾಗಿ ಕರೆತರಲು ಕಾರ್ಯಾಚರಣೆ ನಡೆಸುವಂತೆ ಕರಾವಳಿ ಕಾವಲು ಪಡೆಗೆ ಸೂಚನೆ ನೀಡಿದ್ದಾರೆ.

    ಹವಾಮಾನ ವೈಪರೀತ್ಯದ ಸಂದರ್ಭದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ವಹಿಸಬೇಕು. ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಸಚಿವೆ ಹೆಬ್ಬಾಳ್ಕರ್ ಸೂಚನೆ ನೀಡಿದ್ದಾರೆ.

    ಇಂದು ಬೆಳಗ್ಗೆ ಗಂಗೊಳ್ಳಿ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಅಲೆಗಳ ಅಬ್ಬರಕ್ಕೆ ಸಿಲುಕಿ ಮಗುಚಿಬಿದ್ದ ಪರಿಣಾಮ ಮೂವರು ಮೀನುಗಾರರು ನಾಪತ್ತೆಯಾಗಿದ್ದಾರೆ.

    ಲಕ್ಷ್ಮೀ ಹೆಬ್ಬಾಳಕರ್

    ಉಡುಪಿಯ ಬೈಂದೂರಿನ ಗಂಗೊಳ್ಳಿಯಲ್ಲಿ ಮೀನುಗಾರಿಕೆಯ ದೋಣಿ ಮುಗುಚಿ ಮೂವರು ಮೀನುಗಾರರು ನೀರಿನಲ್ಲಿ ನಾಪತ್ತೆಯಾಗಿರುವ ಸುದ್ದಿ ತಿಳಿದು ಸಂಕಟವಾಯಿತು. ಆದಷ್ಟು ಬೇಗ ಮೀನುಗಾರರು ಸುರಕ್ಷಿತವಾಗಿ ಹಾಗೂ ಜೀವಂತವಾಗಿ ಮರಳಿ ಬರಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.

    ನಾಪತ್ತೆಯಾದವರ ಪತ್ತೆಗೆ ಚುರುಕಾಗಿ ಕಾರ್ಯಾಚರಣೆ ನಡೆಸುವಂತೆ ಕರಾವಳಿ ಕಾವಲು ಪಡೆಗೆ ಮತ್ತು ಜಿಲ್ಲಾಡಳಿತಕ್ಕೆ ಈಗಾಗಲೇ ಸೂಚನೆ ನೀಡಲಾಗಿದೆ. – ಲಕ್ಷ್ಮೀ ಹೆಬ್ಬಾಳಕರ್

    ಗಂಗೊಳ್ಳಿ ಸೀವಾಕ್ ಬಳಿ ಈ ದುರ್ಘಟನೆ ನಡೆದಿದ್ದು, ಓರ್ವ ಮೀನುಗಾರನನ್ನು ರಕ್ಷಿಸಲಾಗಿದೆ.

    ಸುರೇಶ್ ಖಾರ್ವಿ, ಜಗನ್ನಾಥ್ ಖಾರ್ವಿ ಮತ್ತು ರೋಹಿತ್ ಖಾರ್ವಿ ನಾಪತ್ತೆಯಾದ ಮೀನುಗಾರರು. ಸಂತೋಷ್ ಖಾರ್ವಿ ಎನ್ನುವವರನ್ನು ಬೇರೊಂದು ಬೋಟ್ ನವರು ರಕ್ಷಿಸಿದ್ದಾರೆ ಎಂದು ತಿಳಿದುಬಂದಿದೆ.

    ಸುರೇಶ ಖಾರ್ವಿ ಮಾಲಕತ್ವದ ದೋಣಿಯಲ್ಲಿ ಮಂಗಳವಾರ ಬೆಳಗ್ಗೆ ನಾಲ್ವರು ಮೀನುಗಾರರು ಮೀನುಗಾರಿಕೆ ಹೊರಟಿದ್ದರು. ಈ ವೇಳೆ ಅಲೆಗಳ ಅಬ್ಬರಕ್ಕೆ ಸಿಲುಕಿದ ದೋಣಿ ಮಗುಚಿ ಬಿದ್ದಿದೆ. ಈ ವೇಳೆ ಸಂತೋಷ್ ಖಾರ್ವಿ ಈಜಿ ಬೇರೊಂದು ದೋಣಿ ತಲುಪಿದ್ದರೆ, ಉಳಿದ ಮೂವರು ಮೀನುಗಾರರು ಈತನಕ ನಾಪತ್ತೆಯಾಗಿದ್ದಾರೆ. ಅವರ ಪತ್ತೆಗಾಗಿ ಪೊಲೀಸರು, ಕರಾವಳಿ ಕಾವಲು ಪಡೆ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

  • ಉಡುಪಿ: ಎಂ.ಜಿ.ಎಂ. ಕಾಲೇಜ್ ಸಮೀಪ ಎಕ್ಸ್‌ಪ್ರೆಸ್ ಬಸ್ಸುಗಳ ನಡುವೆ ಢಿಕ್ಕಿ; ಹಲವರಿಗೆ ಗಾಯ

    ಉಡುಪಿ, ಜುಲೈ 15, 2025: ಉಡುಪಿ-ಮಣಿಪಾಲ ಹೆದ್ದಾರಿಯಲ್ಲಿ ಎಂ.ಜಿ.ಎಂ. ಕಾಲೇಜ್ ಸಮೀಪ ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಮುಖಾಮುಖಿ ಢಿಕ್ಕಿಯಾದ ಪರಿಣಾಮ ಹಲವಾರು ಪ್ರಯಾಣಿಕರಿಗೆ ಗಾಯವಾಗಿದೆ.

    ಪ್ರತ್ಯಕ್ಷದರ್ಶಿಗಳ ಪ್ರಕಾರ, ಮಣಿಪಾಲದಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಬಸ್ ಬ್ರೇಕ್ ಕಳೆದುಕೊಂಡು ಎದುರು ದಿಕ್ಕಿನಿಂದ ಬರುತ್ತಿದ್ದ ಮತ್ತೊಂದು ಖಾಸಗಿ ಎಕ್ಸ್‌ಪ್ರೆಸ್ ಬಸ್‌ಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.ಈ ಘರ್ಷಣೆಯಿಂದಾಗಿ ಎರಡೂ ವಾಹನಗಳಿಗೆ ಗಣನೀಯ ಹಾನಿ ಉಂಟಾಗಿದ್ದು, ಹೆದ್ದಾರಿಯ ಎರಡೂ ಬದಿಗಳಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ.

    ಘಟನೆಯ ಸ್ಥಳಕ್ಕೆ ಉಡುಪಿ ಟ್ರಾಫಿಕ್ ಪೊಲೀಸರು ಧಾವಂತಾಗಿ ಟ್ರಾಫಿಕ್ ಸಮಸ್ಯೆಯನ್ನು ನಿವಾರಿಸಿದ್ದಾರೆ. ಗಾಯಾಳುಗಳಿಗೆ ಆರೈಕೆ ಒದಗಿಸುವ ಕುರಿತು ಮತ್ತಷ್ಟು ಮಾಹಿತಿ ಇನ್ನಷ್ಟು ತನಿಖೆಯ ನಂತರ ತಿಳಿದುಬರುವ ಸಾಧ್ಯತೆ ಇದೆ.

  • ಗಂಗೊಳ್ಳಿ: ನಾಡದೋಣಿ ಮಗುಚಿ ಮೂವರು ಮೀನುಗಾರರು ನಾಪತ್ತೆ; ಓರ್ವ ಪಾರು

    ಗಂಗೊಳ್ಳಿ, ಜುಲೈ 15, 2025: ಗಂಗೊಳ್ಳಿ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಅಲೆಗಳ ಅಬ್ಬರಕ್ಕೆ ಸಿಲುಕಿ ಮಗುಚಿಬಿದ್ದ ಪರಿಣಾಮ ಮೂವರು ಮೀನುಗಾರರು ನಾಪತ್ತೆಯಾದ ಘಟನೆ ಇಂದು ಬೆಳಗ್ಗೆ ನಡೆದಿದೆ.

    ಸುರೇಶ್ ಖಾರ್ವಿ (45), ಲೋಹಿತ್ ಖಾರ್ವಿ (38), ಜಗ್ಗು ಯಾನೆ ಜಗದೀಶ್ ಖಾರ್ವಿ (36) ನಾಪತ್ತೆಯಾದ ಮೀನುಗಾರರು. ಸುರೇಶ ಖಾರ್ವಿ ಮಾಲಕತ್ವದ ದೋಣಿಯಲ್ಲಿ ಮಂಗಳವಾರ ಬೆಳಗ್ಗೆ ನಾಲ್ವರು ಮೀನುಗಾರರು ಮೀನುಗಾರಿಕೆ ಹೊರಟಿದ್ದರು. ಈ ವೇಳೆ ಅಲೆಗಳ ಅಬ್ಬರಕ್ಕೆ ಸಿಲುಕಿದ ದೋಣಿ ಮಗುಚಿ ಬಿದ್ದಿದೆ. ಈ ವೇಳೆ ಸಂತೋಷ್ ಖಾರ್ವಿ ಈಜಿ ಬೇರೊಂದು ದೋಣಿ ತಲುಪಿದ್ದರೆ, ಉಳಿದ ಮೂವರು ಮೀನುಗಾರರು ಈತನಕ ನಾಪತ್ತೆಯಾಗಿದ್ದಾರೆ.

    ದೋಣಿ ಮಗುಚಿದ ವೇಳೆ ಓರ್ವ ನೀರಿಗೆ ಬಿದ್ದಿದ್ದಾನೆ. ಆತನನ್ನು ರಕ್ಷಿಸಲು ಮುಂದಾದ ಇನ್ನಿಬ್ಬರು ಕೂಡ ನೀರುಪಾಲಾಗಿದ್ದಾರೆ. ಸದ್ಯ ನಾಪತ್ತೆಯಾದ ಮೀನುಗಾರರಿಗೆ ಸಮುದ್ರದಲ್ಲಿ ಹುಡುಕಾಟ ನಡೆಸಲಾಗುತ್ತಿದೆ.

    ಶೋಧ ಕಾರ್ಯ:
    ನಾಪತ್ತೆಯಾಗಿರುವ ಮೂವರು ಮೀನುಗಾರರ ರಕ್ಷಣೆಗೆ ಶೋಧಕಾರ್ಯ ನಡೆಸಲಾಗುತ್ತಿದೆ. ಕರಾವಳಿ ಕಾವಲು ಪಡೆ ಗಂಗೊಳ್ಳಿ ಠಾಣೆಯ ಸಿಬ್ಬಂದಿಗಳು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಸ್ಥಳೀಯ ಮೀನುಗಾರರು ಹುಡುಕಾಟ ನಡೆಸುತ್ತಿದ್ದಾರೆ. ನಿರಂತರವಾಗಿ ಸುರಿಯುತ್ತಿರುವ ಗಾಳಿಮಳೆ ಕಾರ್ಯಾಚರಣೆಗೆ ಅಡ್ಡಿಯುಂಟುಮಾಡಿದೆ.

  • ಕಾರವಾರದಲ್ಲಿ 1.30 ಕೋಟಿ ಫಲಾನುಭವಿಗಳಿಗೆ ಶಕ್ತಿ ಯೋಜನೆ ಪ್ರಯೋಜನ – ರಾಜೇಂದ್ರ ಎಚ್ ರಾಣೆ

    ಕಾರವಾರ, ಜುಲೈ 14, 2025:ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕಾರವಾರ ವ್ಯಾಪ್ತಿಯಲ್ಲಿ ಇದುವರೆಗೆ 1.30 ಕೋಟಿ ಗೂ ಅಧಿಕ ಫಲಾನುಭವಿಗಳು ಶಕ್ತಿ ಯೋಜನೆಯ ಸದುಪಯೋಗ ಪಡೆದುಕೊಂಡಿದ್ದು ಇದರ ಟಿಕೆಟ್ ಮೌಲ್ಯ ರೂ. 41.81 ಕೋಟಿಗಳಾಗಿದೆ ಎಂದು ಕಾರವಾರ ತಾಲೂಕು ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರ ಸಮಿತಿಯ ಅಧ್ಯಕ್ಷ ರಾಜೇಂದ್ರ ಎಚ್ ರಾಣೆ ಹೇಳಿದರು.

    ಅವರು ಸೋಮವಾರ ಕಾರವಾರ ಬಸ್ ನಿಲ್ದಾಣದಲ್ಲಿ , ರಾಜ್ಯದಲ್ಲಿ ಶಕ್ತಿ ಯೋಜನೆಯಡಿ ಇಲ್ಲಿಯವರೆಗೆ 500 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿರುವ ಕುರಿತ ಆಚರಿಸಿದ ಸಂಭ್ರಮದ ಕಾರ್ಯಕ್ರಮದಲ್ಲಿ ಸಾರಿಗೆ ಬಸ್ಗೆ ಪೂಜೆ ಸಲ್ಲಿಸಿ ಮಾತನಾಡಿದರು.

    ರಾಜ್ಯ ಸರ್ಕಾರವು ಚುನಾವಣಾ ಸಂದರ್ಭದಲ್ಲಿ ಘೋಷಣೆ ಮಾಡಿದ ಪಂಚ ಗ್ಯಾರಂಟಿ ಯೋಜನೆಗಳನ್ನು ರಾಜ್ಯದಲ್ಲಿ ಯಶಸ್ವಿಯಾಗಿ ಅನುಷ್ಠಾನ ಮಾಡಿ ಕಾರ್ಯರೂಪಕ್ಕೆ ತರುವುದರ ಮೂಲಕ ನುಡಿದಂತೆ ನಡೆದಿದೆ. ಐದು ಗ್ಯಾರಂಟಿ ಯೋಜನೆಗಳ ಪೈಕಿ ಶಕ್ತಿ ಯೋಜನೆಯನ್ನು ಜೂನ್ 2023 ರಿಂದ ಜಾರಿಗೊಳಿಸಿದೆ. ರಾಜ್ಯದಲ್ಲಿ ಶಕ್ತಿ ಯೋಜನೆಯ ಫಲಾನುಭವಿ ಪ್ರಯಾಣಿಕರ ಸಂಖ್ಯೆ ಈಗ 500 ಕೋಟಿ ಗಡಿಯನ್ನು ದಾಟಿದ್ದು, ರಾಜ್ಯದ ಎಲ್ಲಾ ಮಹಿಳಾ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಂಡಿದ್ದಾರೆ ಎಂದರು.

    ರಾಜ್ಯ ಸರ್ಕಾರ ಪ್ರಪಂಚದಲ್ಲೇ ಪ್ರಥಮ ಬಾರಿಗೆ ರಾಜ್ಯದಲ್ಲಿ ಇಂತಹ ಯೋಜನೆಯನ್ನು ಜಾರಿಗೆ ತಂದಿದ್ದು, ಶಕ್ತಿ ಯೋಜನೆಯ ಯಶಸ್ವಿಯಂತೆ ಅನ್ಯಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ, ಯುವನಿಧಿ ಯೋಜನೆಯು ಕೂಡ ಯಶಸ್ವಿಗೊಂಡಿದೆ ಎಂದರು.

    ಈ ಸಂದರ್ಭದಲ್ಲಿ ಶಕ್ತಿ ಯೋಜನೆ ಯಶಸ್ವಿಗೆ ಪ್ರಮುಖ ಕಾರಣಕರ್ತರಾದ ವಾಹನ ಚಾಲಕರು ಮತ್ತು ನಿರ್ವಾಹಕರನ್ನು ಸನ್ಮಾನಿಸಲಾಯಿತು. ಸಾರ್ವಜನಿಕರಿಗೆ ಹಾಗೂ ಪ್ರಯಾಣಿಕರಿಗೆ ಸಿಹಿ ಹಂಚಿ, ಸರ್ಕಾರ ಮತ್ತು ಸಾರಿಗೆ ಇಲಾಖೆಗೆ ಧನ್ಯವಾದ ಅರ್ಪಿಸಲಾಯಿತು.

    ಈ ಸಂದರ್ಭದಲ್ಲಿ ವಾ.ಕ.ರ.ಸಾ ಸಂಸ್ಥೆಯ ಕಾರವಾರ ಘಟಕದ ವ್ಯವಸ್ಥಾಪಕಿ ಸೌಮ್ಯ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ವೀರನಗೌಡ ಪಿ. ಏಣಗೌಡರ , ತಾಲ್ಲೂಕು ಗ್ಯಾರಂಟಿ ಅಭಿವೃದ್ಧಿ ಸಮಿತಿಯ ಸದಸ್ಯರು, ಸಾರಿಗೆ ಬಸ್ ನ ಚಾಲಕರು, ನಿರ್ವಾಹಕರು, ಸಾರ್ವಜನಿಕರು, ಪ್ರಯಾಣಿಕರು, ಮತ್ತಿತರರು ಉಪಸ್ಥಿತರಿದ್ದರು.

  • ಪೊಲೀಸರಿಂದ ಫೈರಿಂಗ್: 16 ಪ್ರಕರಣಗಳಲ್ಲಿ ಆರೋಪಿತನಾಗಿರುವ ಆರೋಪಿ ಬಂಧನ

    ಕಾರವಾರ, ಜುಲೈ 14, 2025: ಹದಿನಾರು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಅಂತರ ಜಿಲ್ಲಾ ರೌಡಿಶೀಟರ್ ಪ್ರವೀಣ ಮನೋಹರ ಸುಧೀರ್ (37) ಎಂಬಾತನನ್ನು ಖಚಿತ ಮಾಹಿತಿ ಮೇರೆಗೆ ಬಂಧಿಸಲು ಹೋಗಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿದ ಘಟನೆ ಯಲ್ಲಾಪುರದ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಯಲ್ಲಾಪುರ-ಹಳಿಯಾಳ ರಾಜ್ಯ ಹೆದ್ದಾರಿ ಸಮೀಪದ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ತಮ್ಮ ರಕ್ಷಣೆಗಾಗಿ ಪೊಲೀಸರು ಫೈರಿಂಗ್ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

    ರಾಮನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಜಾತಿ ನಿಂದನೆ ಸೇರಿದಂತೆ, ಕೊಲೆ ಯತ್ನ, ಸುಲಿಗೆ, ಮಹಿಳೆಯರ ಮೇಲಿನ ದೌರ್ಜನ್ಯ ಸೇರಿ ಒಟ್ಟು 16 ಪ್ರಕರಣಗಳು ಆರೋಪಿ ಮೇಲೆ ದಾಖಲಾಗಿದ್ದವು.

    ರೌಡಿಶೀಟರ್ ಪ್ರವೀಣ ಮನೋಹರ ಸುಧೀರ್

    ದಾಂಡೇಲಿ ಉಪ ವಿಭಾಗದ ಡಿವೈಎಸ್‌ಪಿ ಶ್ರೀ ಶಿವಾನಂದ ಮದರಖಂಡಿ ಅವರ ಮಾರ್ಗದರ್ಶನದಲ್ಲಿ ಸಿ.ಪಿ.ಐ-ಜೋಯಿಡಾ ಚಂದ್ರಶೇಖರ ಹರಿಹರ ನೇತೃತ್ವದಲ್ಲಿ ಪಿ.ಎಸ್.ಐ ಮಹಾಂತೇಶ ನಾಯಕ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಈತನನ್ನು ಬಂದಿಸಲಾಗಿದೆ.

    ಯಲ್ಲಾಪುರ ಠಾಣಾ ವ್ಯಾಪ್ತಿಯ ಕಣ್ಣಿಗೇರಿ ಬಳಿ ಅರಣ್ಯದಲ್ಲಿ ಪ್ರವೀಣ ಅವಿತುಕೊಂಡಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಆತನನ್ನು ಬಂಧಿಸಲು ಮುಂದಾಗಿದ್ದಾರೆ. ಆಗ ಆರೋಪಿಯು ಚಾಕು ಮತ್ತು ಕಲ್ಲುಗಳಿಂದ ಪಿ.ಎಸ್.ಐ ಮಹಾಂತೇಶ ನಾಯಕ ಮತ್ತು ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ವೇಳೆ ಪಿ.ಎಸ್.ಐ ಮಹಾಂತೇಶ ನಾಯಕ ತಮ್ಮ ಸರ್ವಿಸ್ ರಿವಾಲ್ವರ್‌ನಿಂದ 2 ಬಾರಿ ಗಾಳಿಯಲ್ಲಿ ಫೈರ್ ಮಾಡಿ, ನಂತರ ಆರೋಪಿ ಪ್ರವೀಣ ನ ಬಲಗಾಲಿನ ಮಂಡಿಯ ಕೆಳಭಾಗಕ್ಕೆ ಗುಂಡು ಹಾರಿಸಿ ಆತನನ್ನು ಬಂಧಿಸಿದ್ದಾರೆ.

    ಘಟನೆಯಲ್ಲಿ ಪಿ.ಎಸ್.ಐ ಮಹಾಂತೇಶ ಮತ್ತು ಸಿಬ್ಬಂದಿಗಳು ಗಾಯಗೊಂಡಿದ್ದು, ಯಲ್ಲಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಂಧಿತ ಆರೋಪಿ ಪ್ರವೀಣನನ್ನು ಸಹ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

  • ಧರ್ಮಗಳ ಅಂತರ ತೊರೆದು ಸೌಹಾರ್ದತೆ ಸ್ಥಾಪಿಸುವುದು ಅಗತ್ಯ: ಶ್ರೀ ವಸಂತನಾಥ ಗುರೂಜಿ

    ಕುಂದಾಪುರ: ಭಾರತದಲ್ಲಿ ಹುಟ್ಟಿದ ಪ್ರತಿಯೊಬ್ಬರೂ ನಾನು ಭಾರತೀಯ ಎನ್ನುವ ಧ್ಯೇಯವನ್ನು ಅರ್ಥ ಮಾಡಿಕೊಳ್ಳಬೇಕು. ಎಲ್ಲಾ ಧರ್ಮಗಳೂ ಒಂದೇ ಎಂಬ ಸೌಹಾರ್ದತೆಯನ್ನು ಸಾರುವ ನಿಟ್ಟಿನಲ್ಲಿ ನಾವೆಲ್ಲ ಕೈಜೋಡಿಸಬೇಕಾಗಿದೆ. ಜಾತಿ, ಮತ, ಪಂಥಗಳ ಅಂತರಗಳನ್ನು ತೊರೆದು ಸೌಹಾರ್ದತೆಯೊಂದಿಗೆ ಸಾಗಬೇಕು ಎಂದು ಹಲಗೇರಿ ಜೋಗಿ ಮನೆಯ ಶ್ರೀ ವಸಂತನಾಥ ಗುರೂಜಿ ಹೇಳಿದ್ದಾರೆ.

    ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘವು ಕರಾವಳಿ ಕರ್ನಾಟಕದಲ್ಲಿ ಕೋಮು ಸೌಹಾರ್ದವನ್ನು ಬಲಪಡಿಸುವ ಉದ್ದೇಶದಿಂದ ಹೃದಯ ಹೃದಯಗಳನ್ನು ಬೆಸೆಯೋಣ ಎಂಬ ಧೈಯವಾಕ್ಯದೊಂದಿಗೆ ಹಮ್ಮಿಕೊಳ್ಳಲಾದ ’ಸೌಹಾರ್ದ ಸಂಚಾರ’ವನ್ನು ಸೋಮವಾರ ಕುಂದಾಪುರದಲ್ಲಿ ಉದ್ಘಾಟಿಸಿ ಅವರು ಮಾತನಾಡುತಿದ್ದರು.

    ಸೌಹಾರ್ದ ಸಂಚಾರಕ್ಕೆ ಚಾಲನೆ ನೀಡಿದ ಕರ್ನಾಟಕ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷ ಮೌಲಾನಾ ಶಾಫಿ ಸಅದಿ ಮಾತನಾಡಿ, ಪವಿತ್ರ ಕುರಾನ್ ಹಿಂಸೆಯನ್ನು ಆರಾಧಿಸುವುದಿಲ್ಲ. ಪೈಗಂಬರ್ ಜೀವನ ಚರಿತ್ರೆ ಯನ್ನು ಸರಿಯಾಗಿ ಅಧ್ಯಯನ ಮಾಡಿದ ಯಾವ ವ್ಯಕ್ತಿಯೂ ಧರ್ಮದ್ವೇಷ ಮಾಡಲು ಸಾಧ್ಯವಿಲ್ಲ. ಜಗತ್ತಿನ ಯಾವ ಧರ್ಮವೂ ಇನ್ನೊಂದು ಧರ್ಮವನ್ನು ಪ್ರೀತಿಸು ಎನ್ನುತ್ತದೆಯೇ ಹೊರತು ದ್ವೇಷಿಸಲು ಉಪದೇಶಿ ಸುವುದಿಲ್ಲ. ಎಲ್ಲಾ ಧರ್ಮದ ಸಾರ ಶಾಂತಿ ಸಾರುವುದೇ ಆಗಿದೆ ಎಂದು ಹೇಳಿದರು.

    “ಪ್ರಸ್ತುತ ಕಾಲಘಟ್ಟದಲ್ಲಿ ಸೌಹಾರ್ದ ಸಂಚಾರ ಆರಂಭಿಸುವ ಸ್ಥಿತಿಗೆ ತಲುಪಿದ್ದು ಈ ಬಗ್ಗೆ ಗಂಭೀರವಾಗಿ ಚಿಂತನೆ ನಡೆಯಬೇಕು. ಕುಂದಾಪುರ ತಾಲೂಕಿನ ಮಂದಿ ನೂರಾರು ವರ್ಷಗಳಿಂದ ಸೌಹಾದರ್ಯುತ ಜೀವನ ನಡೆಸುತ್ತಿದ್ದಾರೆ. ಎಲ್ಲಾ ಧರ್ಮದ ಹಬ್ಬ, ಹರಿದಿನಗಳಲ್ಲಿ, ಆಚರಣೆಗಳಲ್ಲಿ ಜನರು ಪರಸ್ಪರ ಬೆರೆ ಯುತ್ತಿದ್ದಾರೆ. ಕೇವಲ ಸಾಮಾಜಿಕ ಜಾಲತಾಣಗಳಲ್ಲಿ ಬಂದು ನೆಮ್ಮದಿ ಹಾಳಾಗಿದ್ದರೂ ಕೂಡ ನೈಜ್ಯ ಪರಂಪರೆಗೆ ಯಾವುದೇ ಸಮಸ್ಯೆಯಾಗಿಲ್ಲ” – ಶಶಿಧರ್ ಹೆಮ್ಮಾಡಿ, ಪ್ರಗತಿಪರ ಚಿಂತಕ

    ಧರ್ಮಗುರು ರೆ.ಫಾ.ನೋವೆಲ್ ಬ್ರಹ್ಮಾವರ ಮಾತನಾಡಿ, ಕ್ರೈಸ್ತ ಮೆಷಿನರಿಗಳು ಕರಾವಳಿಯಲ್ಲಿ ಇಂದಿಗೂ ಯಾವುದೇ ಧರ್ಮ ಬೇದ ಮಾಡದೇ ಸಾಮಾಜಿಕ ಸೇವೆ ನೀಡುತ್ತಿದೆ. ಫಾದರ್ ಮುಲ್ಲರ್ ಆಸ್ಪತ್ರೆ, ಬಾಸೆಲ್ ಮಿಷನ್ ಹೆಂಚಿನ ಕಾರ್ಖಾನೆಗಳು, ಶಿಕ್ಷಣ ಸಂಸ್ಥೆಗಳು ಇಂದಿಗೂ ಕೊಡುಗೆಯಾಗಿ ಉಳಿದಿಲ್ಲ, ಅವು ಸಹೋದರತೆ, ನಂಬಿಕೆ, ವಿಶ್ವಾಸಗಳನ್ನು ಗಟ್ಟಿಗೊಳಿಸುವಲ್ಲಿ ತಮ್ಮದೇ ಕೊಡುಗೆ ನೀಡುತ್ತಿವೆ. ಯಾವ ರಾಜಕೀಯ ಪಕ್ಷಗಳು, ನಾಯಕರು ನಮ್ಮನ್ನು ಒಂದುಗೂಡಿಸಬೇಕಿತ್ತೋ ಅವೇ ನಮ್ಮನ್ನು ವಿಭಜಿಸಲು ಹುನ್ನಾರ ನಡೆಸುತ್ತಿರುವುದನ್ನು ನಾವೆಲ್ಲರೂ ಅರ್ಥ ಮಾಡಿಕೊಳ್ಳಬೇಕಿದೆ ಎಂದರು.

    ಕಾರ್ಯಕ್ರಮಕ್ಕೆ ಮುನ್ನ ಕುಂದಾಪುರದ ಮುಖ್ಯ ಪೇಟೆಯಲ್ಲಿ ಶಾಂತಿ ಮೆರವಣಿಗೆ ನಡೆಯಿತು. ಮುಖ್ಯ ಅತಿಥಿಯಾಗಿ ಪತ್ರಕರ್ತ ಶಶಿಧರ ಹೆಮ್ಮಾಡಿ ಮಾತನಾಡಿದರು. ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘದ ಅಧ್ಯಕ್ಷ ಬಶೀರ್ ಸಅದಿ ಬೆಂಗಳೂರು ಅಧ್ಯಕ್ಷತೆ ವಹಿಸಿದ್ದರು.

    ಉಳ್ಳಾಲ ದರ್ಗಾ ಸಮಿತಿ ಅಧ್ಯಕ್ಷ ಹನೀಫ್ ಹಾಜಿ, ಸಹಬಾಳ್ವೆ ಕುಂದಾಪುರದ ರಾಮಕೃಷ್ಣ ಹೇರ್ಳೆ, ಸಿಪಿಐಎಂ ಪಕ್ಷದ ಮುಖಂಡರಾದ ಚಂದ್ರಶೇಖರ ದೇವಾಡಿಗ, ಮಹಾಬಲ, ಕುಂದಾಪುರ ಕ್ಯಾಥೋಲಿಕ್ ಸಭಾ ಅಧ್ಯಕ್ಷ ವಿಲ್ಸನ್ ಡಿ ಅಲ್ಮೇಡಾ, ನಗರ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ತಾ, ಜಿಲ್ಲಾ ಕಾಂಗ್ರೆಸ್ ವಕ್ತಾರ ವಿಕಾಸ್ ಹೆಗ್ಡೆ, ಕಾಂಗ್ರೆಸ್ ಜಿಲ್ಲಾ ಐಟಿ ಸೆಲ್ ಅಧ್ಯಕ್ಷ ರೋಷನ್ ಶೆಟ್ಟಿ, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ, ಎಸ್ವೈಎಸ್ ಸಂಘಟನೆಯ ಕುಂದಾಪುರ ತಾಲೂಕು ಉಪಾಧ್ಯಕ್ಷ ಅಬ್ದುಲ್ ಸಲಾಂ ಚಿತ್ತೂರು, ವಕ್ಫ್ ಸಲಹಾ ಸಮಿತಿ ಜಿಲ್ಲಾ ಅಧ್ಯಕ್ಷ ಅಬ್ದುಲ್ ಮುತಾಲಿ ವಂಡ್ಸೆ, ನಾವುಂದ ಜುಮ್ಮಾ ಮಸೀದಿ ಖತೀಬರಾದ ಅಬ್ದುಲ್ ಲತೀಫ್ ಫಾಲೆಲಿ, ಕುಂದಾಪುರ ಜುಮ್ಮಾ ಮಸೀದಿ ಅಧ್ಯಕ್ಷ ವಸೀಂ ಬಾಷಾ, ಸಾಮಾಜಿಕ ಕಾರ್ಯಕರ್ತ ಮನ್ಸೂರ್ ಮರವಂತೆ ಉಪಸ್ಥಿತರಿದ್ದರು.

    ಎಸ್‌ವೈಎಸ್ ರಾಜ್ಯ ಸಮಿತಿಯ ಸದಸ್ಯ ಕೆ.ಎಂ.ಇಲಿಯಾಸ್ ಸ್ವಾಗತಿಸಿದರು. ಎಸ್‌ವೈಎಸ್ ಸಮಿತಿಯ ರಾಜ್ಯಾಧ್ಯಕ್ಷ ಬಶಿರ್ ಸಅದಿ ಬೆಂಗಳೂರು ಪ್ರಾಸ್ತಾವಿಕ ವಾಗಿ ಮಾತನಾಡಿದರು. ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಅಬು ಅಹಮ್ಮದ್ ವಂದಿಸಿದರು.

  • ಕಾರ್ಕಳ ಪರಶುರಾಮ ಮೂರ್ತಿ ಕಂಚಿನದ್ದಲ್ಲ: ತನಿಖೆಯಿಂದ ಸಾಬೀತು

    ಉಡುಪಿ, ಜುಲೈ 14, 2025: ಕಾರ್ಕಳ ತಾಲೂಕಿನ ಉಮ್ಮಿಕಲ್ ಬೆಟ್ಟದ ಪರಶು ರಾಮ್ ಥೀಮ್ ಪಾರ್ಕ್‌ನಲ್ಲಿ ಶಿಲ್ಪಿಕೃಷ್ಣ ನಾಯ್ಕ ಹಿತ್ತಾಳೆಯಿಂದ ಪರಶು ರಾಮ ಮೂರ್ತಿ ನಿರ್ಮಿಸಿರುವುದೇ ಹೊರತು ಕಂಚಿನಿಂದ ಅಲ್ಲ ಎಂಬುದು ತಜ್ಞರ ಪರಿಶೀಲನಾ ವರದಿ ಹಾಗೂ ತನಿಖೆಯಿಂದ ಸಾಬೀತಾಗಿದೆ.

    ಶಿಲ್ಪಿ ಕೃಷ್ಣ ನಾಯಕ್ ಕ್ರಿಶ್ ಆರ್ಟ್ ವರ್ಲ್ಡ್ ಎಂಬ ಸಂಸ್ಥೆಯ ಮೂಲಕ ಪರಶುರಾಮ್ ಥೀಮ್ ಪಾರ್ಕ್‌ನಲ್ಲಿ ಕಂಚಿನ ಪರಶುರಾಮ್ ಮೂರ್ತಿಯನ್ನು ಸ್ಥಾಪಿಸಲು ಉಡುಪಿ ನಿರ್ಮಿತಿ ಕೇಂದ್ರದಿಂದ ಹಣ ಪಡೆದು ಕೊಂಡು ಕಾಮಗಾರಿ ನಡೆಸುತ್ತಿದ್ದು, ನಂತರ ಕೃಷ್ಣ ನಾಯ್ಕ ಕಂಚಿನ ಮೂರ್ತಿಯನ್ನು ಮಾಡದೇ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ ಸರಕಾರಕ್ಕೆ ವಂಚನೆ ಮಾಡಿರುವುದಾಗಿ 2024ರ ಜೂ.21ರಂದು ಕಾರ್ಕಳದ ಕೃಷ್ಣ ಶೆಟ್ಟಿ ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಈ ಬಗ್ಗೆ ತನಿಖೆ ನಡೆಸಿದ್ದು, ಶಿಲ್ಪಿಕೃಷ್ಣ ನಾಯ್ಕ ಕಂಚಿನ ಲೋಹದಿಂದ ಪರಶುರಾಮ ಮೂರ್ತಿಯ ಬದಲು ಹಿತ್ತಾಳೆ ಲೋಹದಿಂದ ನಿರ್ಮಾಣ ಮಾಡಿರುವುದು ತಜ್ಞರ ಪರಿಶೀಲನಾ ವರದಿ ಹಾಗೂ ತನಿಖೆಯಿಂದ ಸಾಬೀತಾಗಿದೆ. ಅದೇ ರೀತಿ ಉಡುಪಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಹಾಗೂ ಇಂಜಿನಿಯರ್ ಸಚಿನ್ ವೈ.ಕುಮಾರ್ ವರ್ಕ್ ಆರ್ಡರ್‌ನಲ್ಲಿದ್ದ ಷರತ್ತುಗಳನ್ನು ಪಾಲಿಸದೆ, 2023ರ ಅ.12ರಂದು ಪರಶುರಾಮ ಮೂರ್ತಿಯ ಸೊಂಟದಿಂದ ಮೇಲ್ಭಾಗವನ್ನು ಉಮ್ಮಿಕಲ್ ಬೆಟ್ಟದಿಂದ ತೆಗೆದುಕೊಂಡು ಹೋಗಿ ಅಲೆವೂರು ಗ್ರಾಮದ ಪ್ರಗತಿ ನಗರ ಎಂಬಲ್ಲಿರುವ ನಿರ್ಮಿತಿ ಕೇಂದ್ರಕ್ಕೆ ಸಂಬಂಧಿಸಿರುವ ಶೆಡ್‌ನಲ್ಲಿ 2024ರ ಫೆ.25ರ ತನಕ ಇರಿಸಿಕೊಂಡಿದ್ದರು.

    ಆದರೆ ಮೂರ್ತಿಯ ಸೊಂಟದಿಂದ ಮೇಲ್ಭಾಗವನ್ನು ಶಿಲ್ಪಿ ಕೃಷ್ಣ ನಾಯ್ಕಗೆ ಹಸ್ತಾಂತರ ಮಾಡಿದ್ದು, ಆತ ಅದನ್ನು ಬೆಂಗಳೂರಿಗೆ ಸಾಗಾಟ ಮಾಡಿರುವುದಾಗಿ ಅರುಣ್ ಕುಮಾರ್ ತಪ್ಪು ಮಾಹಿತಿಯನ್ನು ನೀಡಿದ್ದಾರೆ. ಈ ಮೂಲಕ ಆರೋಪಿಗಳಾದ ಶಿಲ್ಪಿ ಕೃಷ್ಣ ನಾಯ್ಕ ಉಡುಪಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಹಾಗೂ ಇಂಜಿನಿಯರ್ ಸಚಿನ್ ವೈ.ಕುಮಾರ್ ಅಪರಾಧಿಕ ಒಳಸಂಚು ಮತ್ತು ನಂಬಿಕೆ ದ್ರೋಹ ಮತ್ತು ವಂಚನೆ ಎಸಗಿ, ಸಾಕ್ಷಿ ನಾಶ ಮಾಡಿರುವುದು ಕಂಡುಬಂದಿದೆ. ಅವರ ವಿರುದ್ಧ ಕಲಂ. 420, 409, 201, 120 (ಬಿ) ಜೊತೆಗೆ 34 ಐಪಿಸಿ ಯಂತೆ 1231 ಪುಟಗಳ ದೋಷಾರೋಪಣಾ ಪಟ್ಟಿಯನ್ನು ತಯಾರಿಸಿ ಪೊಲೀಸರು ಕಾರ್ಕಳದ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

  • ಮನೋರೋಗಿ ಸಹಜ ಸ್ಥಿತಿಯತ್ತ; ಹನ್ನೆರಡು ವರ್ಷಗಳ ಬಳಿಕ ಯುವಕ ಕುಟುಂಬಕ್ಕೆ

    ಉಡುಪಿ ಜು.13 ಕಳೆದ ಕೆಲವು ದಿನಗಳ ಹಿಂದೆ ಮಿತ್ರ ಆಸ್ಪತ್ರೆ ಬಳಿ ಸಾರ್ವಜನಿಕರ ಮನೆಗಳಿಗೆ ಬೆಳಗಿನ ಜಾವ ಆಗಮಿಸಿ ಭಯದ ವಾತಾವರಣ ಸೃಷ್ಟಿಸಿದ್ದ ಅಪರಿಚಿತ ಮಾನಸಿಕ ಯುವಕನನ್ನು ವಿಶು ಶೆಟ್ಟಿ ಅಂಬಲಪಾಡಿ ರಕ್ಷಿಸಿ , ಬಾಳಿಗ ಆಸ್ಪತ್ರೆಗೆ ದಾಖಲಿಸಿದ್ದು ಇದೀಗ ಯುವಕನ ಕುಟುಂಬ ಪತ್ತೆಯಾಗಿದ್ದು ಹಸ್ತಾಂತರಿಸಲಾಗಿದೆ.

    12 ವರ್ಷದ ಹಿಂದೆಯೇ ಮನೆ ಬಿಟ್ಟು ಹೋದ ನವಲಗುಂದ ಮೂಲದ ಸುಧಾಕರ ಪವಾರ್ (33) ರಕ್ಷಿಸಲ್ಪಟ್ಟ ಮಾನಸಿಕ ಯುವಕ. ಇದೀಗ ಕುಟುಂಬಕ್ಕೆ ಮಾಹಿತಿ ಲಭಿಸಿದ್ದು ಸಹೋದರ ಶ್ರೀನಿವಾಸ್ ಉಡುಪಿಗೆ ಬಂದಿದ್ದಾರೆ. ಬಾಳಿಗಾ ಆಸ್ಪತ್ರೆಯಲ್ಲಿ ವೈದ್ಯರು ರೋಗಿಯ ಬಗ್ಗೆ ಮಾಹಿತಿ ಹಾಗೂ ಮುಂದಿನ ಚಿಕಿತ್ಸೆಯ ಬಗ್ಗೆ ಸಹೋದರನಿಗೆ ತಿಳಿಸಿದ್ದಾರೆ. ಚಿಕಿತ್ಸೆಗೆ ಯುವಕ ಸ್ಪಂದಿಸಿದ್ದು ಸಹಜ ಸ್ಥಿತಿಗೆ ಬಂದಿದ್ದಾನೆ.

    ಸುಧಾಕರ್ ಪವಾರ್ ನನ್ನು ಸಹೋದರನ ವಶಕ್ಕೆ ನೀಡುವಾಗ 12 ವರ್ಷಗಳೇ ಕಳೆದು ಹೋಗಿದೆ ಈತ ಮನೆ ತೊರೆದು ಮನೆಗೆ ಕರೆದುಕೊಂಡು ಹೋಗುತ್ತೇನೆ, ಸಹಕರಿಸಿದ ವಿಶು ಶೆಟ್ಟಿ ಹಾಗೂ ಚಿಕಿತ್ಸೆ ನೀಡಿದ ಆಸ್ಪತ್ರೆಯ ವೈದ್ಯಾಧಿಕಾರಿಗೆ ಧನ್ಯವಾದ ತಿಳಿಸಿದ್ದಾರೆ.

    ತೀರಾ ಬಡತನದ ಕುಟುಂಬದವರಾದ ಇವರು ಆಸ್ಪತ್ರೆಯ ಚಿಕಿತ್ಸಾ ವೆಚ್ಚ ರೂ.15,500/- ಭರಿಸಲು ಅಸಹಾಯಕತೆ ತೋರಿಸಿದಾಗ ಚಿಕಿತ್ಸಾ ವೆಚ್ಚವನ್ನು ವಿಶು ಶೆಟ್ಟಿಯವರು ಭರಿಸಿ ಸಹಕರಿಸಿದರು.

  • ಉಡುಪಿ: ನಗರದಲ್ಲಿ ಸರ್ವಧರ್ಮೀಯರಿಂದ ’ಸೌಹಾರ್ದ ಸಂಚಾರ’; ಐಕ್ಯತೆಯ ಸಂದೇಶ

    ಉಡುಪಿ, ಜುಲೈ 14, 2025: ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘವು ‘ಹೃದಯ ಹೃದಯಗಳನ್ನು ಬೆಸೆಯೋಣ’ ಎಂಬ ಧ್ಯೇಯವಾಕ್ಯದೊಂದಿಗೆ ‘ಸೌಹಾರ್ದ ಸಂಚಾರ’ ಕಾರ್ಯಕ್ರಮವನ್ನು ಸೋಮವಾರ ಉಡುಪಿ ನಗರದಲ್ಲಿ ಆಯೋಜಿಸಿತು. ಈ ಕಾರ್ಯಕ್ರಮ ಉಡುಪಿ ಜಾಮೀಯ ಮಸೀದಿಯಿಂದ ಆರಂಭಗೊಂಡು, ನಗರದ ಪ್ರಮುಖ ರಸ್ತೆಗಳ ಮೂಲಕ ಸಾಗಿ ಉಡುಪಿ ಶೋಕಾ ಮಾತಾ ಇಗರ್ಜಿಯಲ್ಲಿ ಸಮಾಪ್ತಿಗೊಂಡಿತು.

    ನಂತರ ನಡೆದ ಸಭೆಯಲ್ಲಿ ಮಾತನಾಡಿದ ಹೋರಾಟಗಾರ ಕಲ್ಕುಳಿ ವಿಠಲ್ ಹೆಗ್ಡೆ, “ನಮ್ಮ ಧರ್ಮ, ನಂಬಿಕೆಗಳು ಖಾಸಗಿಯೇ ಹೊರತು ಸಾರ್ವಜನಿಕ ಅಲ್ಲ. ಆದರೆ ಇತ್ತೀಚಿಗೆ ಕೆಲವರು ಧರ್ಮವನ್ನು ಆಧಾರವಾಗಿ ಇರಿಸಿ ಅಮಾಯಕರ ಮೇಲೆ ದಾಳಿ ಮಾಡಿ ಕೊಲೆ ಮಾಡುವ ಘಟನೆಗಳು ಈ ಜಿಲ್ಲೆಯಲ್ಲಿ ನಡೆಯುತ್ತಿವೆ. ಈ ನಾಡಿನ ಸಾವಿರಾರು ವರ್ಷಗಳಿಂದ ಎಲ್ಲ ಜಾತಿ ಧರ್ಮದವರು ಸೌಹಾದರ್ತೆಯಿಂದ ಬಾಳಿ ಬದುಕುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಕೆಲವರ ಪ್ರಚೋದನೆಗೆ ಜನ ಬಲಿಯಾಗುತ್ತಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದರು.

    “ಇಂದು ಜೈಲುಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಿಂದುಳಿದ ಜಾತಿಯ ಯುವಕರು ಇದ್ದಾರೆ. ದುಡಿದು ತಿನ್ನಬೇಕಾದ ಮಕ್ಕಳು ತಂದೆತಾಯಿಗೆ ಆಸರೆಯಾಗಬೇಕಾದವರು ಜೈಲಿನಲ್ಲಿ ಕೊಳೆಯುತ್ತಿರುವುದು ದುರಂತ. ಈ ದುಷ್ಟ ಶಕ್ತಿಗಳನ್ನು ನಾವೆಲ್ಲ ಸೇರಿ ಸೋಲಿಸಬೇಕು. ಸಮಾನತೆ, ಸಂವಿಧಾನ ಮತ್ತು ಜಾತ್ಯತೀತತೆಯ ವಿರುದ್ಧ ಇರುವ ಸಂಘಟನೆಗಳನ್ನು ಒಗ್ಗಟ್ಟಿನಿಂದ ಎದುರಿಸಬೇಕು” ಎಂದು ಕರೆ ನೀಡಿದರು. ಸಾಮಾಜಿಕ ಹೋರಾಟಗಾರ ಅಮೃತ್ ಶೆಣೈ, ಸೌಹಾರ್ದ ಸಂಚಾರ ಸಮಿತಿಯ ಅಧ್ಯಕ್ಷ ಹಂಝತ್ ಹೆಜಮಾಡಿ, ಬೈಂದೂರು ಜೋಗಿಮನೆಯ ಶ್ರೀವಸಂತನಾಥ ಗುರುಜೀ, ಮತ್ತು ಚರ್ಚ್‌ನ ಸಹಾಯಕ ಧರ್ಮಗುರು ರೆ.ಫಾ. ಲಿಯೋ ಪ್ರವೀಣ್ ಡಿಸೋಜಾ ಸಹ ಐಕ್ಯತೆಯ ಸಂದೇಶ ನೀಡಿದರು.

    ಈ ಕಾರ್ಯಕ್ರಮದಲ್ಲಿ ಧರ್ಮಗುರು ಫಾದರ್ ವಿಲಿಯಂ ಮಾರ್ಟಿಸ್, ಎಸ್‌ವೈಎಸ್ ಸಮಿತಿಯ ರಾಜ್ಯಾಧ್ಯಕ್ಷ ಬಶಿರ್ ಸಅದಿ (ಬೆಂಗಳೂರು), ಪ್ರಧಾನ ಕಾರ್ಯದರ್ಶಿ ಮೌಲಾನ ಅಬೂಬಕರ್ ಸಿದ್ದೀಕ್ (ಮೊಂಟಗೊಳಿ), ನ್ಯಾಯವಾದಿ ಹಬೀಬ್, ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಮುಹಮ್ಮದ್ ವೌಲಾ, ಮತ್ತು ಪ್ರಮುಖರಾದ ಎಂ.ಎ.ಗಫೂರ್, ಡಾ.ಗಣನಾಥ ಎಕ್ಕಾರು, ಪ್ರಶಾಂತ್ ಜತ್ತನ್ನ, ರಮೇಶ್ ಕಾಂಚನ್, ಸುಂದರ್ ಮಾಸ್ಟರ್, ಶ್ಯಾಮರಾಜ್ ಬಿರ್ತಿ, ನಾಗೇಶ್ ಉದ್ಯಾವರ, ಪ್ರಭಾಕರ ಪೂಜಾರಿ, ವಹೀದ್ ಶೇಖ್ (ಉದ್ಯಾವರ), ಸುಭಾನ್ ಹೊನ್ನಾಳ, ಇಸ್ಮಾಯಿಲ್ ಹುಸೇನ್ (ಕಟಪಾಡಿ), ಹನೀಫ್ ಹಾಜಿ (ಅಂಬಾಗಿಲು), ತೌಫಿಕ್ ಹಾಜಿ ಸೇರಿದಂತೆ ಇತರರು ಭಾಗವಹಿಸಿದ್ದರು. ಎಸ್‌ವೈಎಸ್ ರಾಜ್ಯ ಸಂಯೋಜಕ ಅಬ್ದುರ್ರಹ್ಮಾನ್ ರಝ್ವಿ (ಕಲ್ಕಟ್ಟ) ಕಾರ್ಯಕ್ರಮವನ್ನು ನಿರೂಪಿಸಿದರು.

  • ನಿಮಿಷಾ ಪ್ರಿಯಾ ಪ್ರಕರಣ; ಎ.ಪಿ. ಅಬೂಬಕರ್ ಮುಸ್ಲಿಯಾರ್ ಮಧ್ಯಸ್ಥಿಕೆ ಬಳಿಕ ಯೆಮೆನ್‌ನಲ್ಲಿ ಮಹತ್ವದ ಸಭೆ : ವರದಿ

    ಕೋಝಿಕೋಡ್, ಜುಲೈ 14, 2025: ನಿಮಿಷಾ ಪ್ರಿಯಾ ಗಲ್ಲುಶಿಕ್ಷೆಗೆ ಸಂಬಂಧಿಸಿದಂತೆ ಯೆಮೆನ್‌ನಲ್ಲಿ ಮಹತ್ವದ ಸಭೆ ನಡೆಯುತ್ತಿದೆ ಎಂದು ವರದಿಯಾಗಿದೆ.

    ಪ್ರಸಿದ್ಧ ಸೂಫಿ ವಿದ್ವಾಂಸ ಶೇಖ್ ಹಬೀಬ್ ಉಮರ್ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಸಭೆಯಲ್ಲಿ ಯೆಮೆನ್ ಸುಪ್ರೀಂ ಕೋರ್ಟ್ ನ್ಯಾಯಾಧೀಶರು, ಕೊಲೆಯಾದ ತಲಾಲ್ ಅವರ ಸಹೋದರ ಭಾಗವಹಿಸುತ್ತಿದ್ದಾರೆ ಎಂದು ವರದಿಯಾಗಿದೆ.

    ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರ ಮಾತುಕತೆ ಬಳಿಕ ಶೇಖ್ ಹಬೀಬ್ ಉಮರ್ ಈ ವಿಷಯದಲ್ಲಿ ಮಧ್ಯಸ್ಥಿಕೆಗೆ ಮುಂದಾದರು ಎಂದು ವರದಿಯಾಗಿದೆ.

    ನಿಮಿಷಾ ಪ್ರಿಯಾ ಅವರು ತಮ್ಮ ವ್ಯವಹಾರ ಪಾಲುದಾರರಾದ ತಲಾಲ್ ಅಬ್ದೋ ಮಹ್ದಿ ಅವರ ಕೊಲೆಗೆ ಸಂಬಂಧಿಸಿ ಯೆಮೆನ್‌ನಲ್ಲಿ ಮರಣದಂಡನೆ ಶಿಕ್ಷೆ ಎದುರಿಸುತ್ತಿದ್ದಾರೆ. 2017ರ ಜುಲೈನಲ್ಲಿ ನಿಮಿಷಾ ಪ್ರಿಯಾಳನ್ನು ಬಂಧಿಸಲಾಗಿತ್ತು. 2020ರಲ್ಲಿ ಯೆಮನ್ ನ್ಯಾಯಾಲಯ ಆಕೆಗೆ ಗಲ್ಲು ಶಿಕ್ಷೆ ವಿಧಿಸಿತ್ತು. ಜುಲೈ 16ರಂದು ನಿಮಿಷಾ ಪ್ರಿಯಾಳನ್ನು ಗಲ್ಲಿಗೇರಿಸಲು ನಿರ್ಧರಿಸಲಾಗಿದೆ ಎಂದು ಯೆಮೆನ್‌ನ ಜೈಲು ಅಧಿಕಾರಿಗಳು ತಿಳಿಸಿದ್ದರು. ನಿಮಿಷಾ ಪ್ರಿಯಾ ಅವರ ತಡೆಯಲು ಹೆಚ್ಚಿನದನ್ನೇನೂ ಮಾಡಲು ಸಾಧ್ಯವಿಲ್ಲ ಎಂದು ಸೋಮವಾರ ಕೇಂದ್ರ ಸರಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು.